ಸ್ಮಾರ್ಟ್ ಸಿಟಿ ಕಾಮಗಾರಿ ಕಳಪೆಯಾದರೆ ಶಿಸ್ತು ಕ್ರಮ

ದಾವಣಗೆರೆ, ಮೇ 26- ಸ್ಮಾರ್ಟ್‌ ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳು ತ್ವರಿತಗತಿಯಲ್ಲಿ ಸಾಗಬೇಕು. ಯಾವುದೇ ಕಾರಣಕ್ಕೂ  ವಿಳಂಬ ಮಾಡಬಾರದು. ಶಂಕು ಸ್ಥಾಪನೆ ನೆರವೇರಿಸಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಿದ್ಧತೆ ನಡೆಸಬೇಕು. ಅಧಿಕಾರಿಗಳು ಯಾವುದೇ ಸಬೂಬು ಹೇಳಬಾರದು ಎಂದು   ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್ ಸೂಚಿಸಿದರು.

ದಾವಣಗೆರೆ ಸ್ಮಾರ್ಟ್ ಸಿಟಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,   ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳು ಗುಣಮಟ್ಟದಿಂದ ಇಲ್ಲ. ಈ ಬಗ್ಗೆ ದೂರುಗಳಿವೆ. ಸರ್ಕಾರ ನಿಮಗೆ ಎಲ್ಲ ಸೌಲಭ್ಯ ನೀಡುತ್ತಿದೆ. ಆದರೂ ಅಧಿಕಾರಿಗಳು ಬೇಜವಾಬ್ದಾರಿ ಯಿಂದ ವರ್ತಿಸುವುದು ಸರಿಯಲ್ಲ. ಈ ಬಗ್ಗೆ ಶಿಸ್ತುಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

  ಮುಂದಿನ ಬಾರಿ ನಾನು ಸಭೆ ನಡೆಸುವುದಿಲ್ಲ. ಬದಲಾಗಿ ನೇರವಾಗಿ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿ ಕ್ರಮ ಜರುಗಿಸುತ್ತೇನೆ. ಜಿಲ್ಲೆಯ ಎಲ್ಲ ಶಾಸಕರೊಂದಿಗೆ ಕಂಟ್ರಾಕ್ಟರ್ ಸಭೆ ನಡೆಸುತ್ತೇನೆ. ಸ್ಮಾರ್ಟ್ ಸಿಟಿ ಯೋಜನೆಯಡಿಯ ಕಾಮಗಾರಿಗಳು ತುಂಬಾ ನಿಧಾನವಾಗುತ್ತಿವೆ. ಈ ಬಗ್ಗೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು. ಕೊರೊನಾ ನೆಪ ಬೇಡ. ಎಲ್ಲಾ ಕಡೆಗಳಲ್ಲಿಯೂ ಕೆಲಸ ನಡೆಯುತ್ತಿದೆ ಎಂದರು.

ಮೇಯರ್ ಅಜಯ್‌ ಕುಮಾರ್ ಮಾತನಾಡಿ, ಸ್ಮಾರ್ಟ್ ಸಿಟಿ ಯೋಜನೆಯಡಿಯ ಕಾಮಗಾರಿಗಳ ಕಂಟ್ರಾಕ್ಟರ್ ಬಗ್ಗೆ ನಿಗಾ ವಹಿಸಬೇಕು. ಅವರಿಗೆ ನೀಡಿದ ಟೆಂಡರ್‍ಗಳನ್ನು ಸಬ್ ಕಂಟ್ರಾಕ್ಟರ್‌ಗೆ ವಹಿಸುವುದರಿಂದ ಕಾಮಗಾರಿಗಳು ಕಳಪೆಯಾಗುತ್ತಿವೆ ಎಂದು ದೂರಿದರು.

ಸಂಸದ ಜಿ.ಎಂ.ಸಿದ್ದೇಶ್ವರ್ ಮಾತನಾಡಿ, ಕಾಮಗಾರಿಗಳು ಕಳಪೆಯಿಂದ ಕೂಡಿದರೆ ಜನ ನಮ್ಮ ಬಗ್ಗೆ ತಪ್ಪು ತಿಳಿದುಕೊಳ್ಳುತ್ತಾರೆ. ಕಳಪೆ ಮಾಡುವುದು ಅವರು, ಕೆಟ್ಟ ಹೆಸರು ಬರುವುದು ಜಿಲ್ಲೆಯ ಜನಪ್ರತಿನಿಧಿಗಳಿಗೆ ಎಂದು ಹೇಳಿದರು.

ಸ್ಮಾರ್ಟ್ ಸಿಟಿ ಎಂ.ಡಿ. ರವೀಂದ್ರ ಮಲ್ಲಾಪೂರ ಮಾತನಾಡಿ, ಜಿಲ್ಲೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಈಗಾಗಲೇ 16 ಕಾಮಗಾರಿಗಳು ಪೂರ್ಣಗೊಂಡಿವೆ. ಇದಕ್ಕೆ 29.44 ಕೋಟಿ  ರೂ. ಅಂದಾಜು ಹಣವಿದ್ದು, 23.05 ವೆಚ್ಚ ಮಾಡಲಾಗಿದೆ. ಇನ್ನುಳಿದಂತೆ 49 ಕಾಮಗಾರಿಗಳು ಪ್ರಗತಿಯಲ್ಲಿವೆ. ಅದಕ್ಕಾಗಿ ಅಂದಾಜು 678.86 ಕೋಟಿ ಹಣವಿದ್ದು, 114.69 ಕೋಟಿ ವೆಚ್ಚ ಮಾಡಲಾಗಿದೆ. ಇನ್ನೂ ಟೆಂಡರ್ ಅಡಿಯಲ್ಲಿ 11 ಕಾಮ ಗಾರಿ ಹಾಗೂ ಡಿಪಿಆರ್ ಹಂತದಲ್ಲಿ 7 ಕಾಮಗಾರಿಗಳು  ಇವೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಶಾಸಕರಾದ ಎಸ್.ಎ.ರವೀಂದ್ರನಾಥ್, ಪ್ರೊ.ಲಿಂಗಣ್ಣ, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಎಡಿಸಿ ಪೂಜಾರ್ ವೀರಮಲ್ಲಪ್ಪ ಉಪಸ್ಥಿತರಿದ್ದರು.

error: Content is protected !!