ಮೆಕ್ಕೆಜೋಳದಲ್ಲಿ ಫಾಲ್ ಆರ್ಮಿ ಹುಳು ಹತೋಟಿ ಕ್ರಮ

ಮೆಕ್ಕೆಜೋಳದಲ್ಲಿ ಫಾಲ್ ಆರ್ಮಿ ಹುಳು ಹತೋಟಿ ಕ್ರಮ - Janathavaniದಾವಣಗೆರೆ, ಜೂ.27- ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಮುಸುಕಿನ ಜೋಳವು ಪ್ರಮುಖ ಬೆಳೆಯಾಗಿದ್ದು, ಮುಂಗಾರು ಪ್ರಾರಂಭ ದಲ್ಲಿ ಉತ್ತಮ ಮಳೆಯಾಗಿದ್ದರಿಂದ ಜಿಲ್ಲೆಯಾದ್ಯಂತ ರೈತರು ಮೆಕ್ಕೆಜೋಳ ಬಿತ್ತನೆ ಮಾಡಿದ್ದಾರೆ.

ರೈತರ ತಾಕುಗಳಿಗೆ ಕೃಷಿ ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದಾಗ ಸೈನಿಕ ಹುಳುವಿನ ಬಾಧೆ ಹೆಚ್ಚಾಗಿರುವುದು ಕಂಡುಬಂದಿದ್ದು, ಇಲಾಖಾ ಅಧಿಕಾರಿಗಳು ರೈತರಿಗೆ ಸೂಕ್ತ ಸಲಹೆ ನೀಡುವಲ್ಲಿ ನಿರತರಾಗಿರುತ್ತಾರೆ. ಸೈನಿಕ ಹುಳುವಿನ ಗುರುತಿಸುವಿಕೆ ಹಾಗೂ ಹತೋಟಿ ಕ್ರಮಗಳನ್ನು ತಿಳಿಸಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಲದ್ದಿಹುಳುವಿನ ಗುರುತಿಸುವಿಕೆ: ಬೆಳೆದ ಹುಳುವಿನ  ಕಪ್ಪು ತಲೆಯ ಮುಂಭಾಗದಲ್ಲಿ ತಲೆ ಕೆಳಗಾದ  Y ಆಕೃತಿಯ ಗುರುತು ಹಾಗೂ ಹುಳದ ಹಿಂಭಾಗದಲ್ಲಿ ನಾಲ್ಕು ದಟ್ಟವಾದ ಕಂದುಬಣ್ಣದ ಚುಕ್ಕೆಗಳು ಚೌಕಾಕಾರದಲ್ಲಿ ಕಂಡುಬರುತ್ತವೆ.

ಲದ್ದಿ ಹುಳುವಿನ ಹತೋಟಿ ಕ್ರಮಗಳು: ಸಕಾಲದಲ್ಲಿ ಬಿತ್ತನೆ ಮಾಡುವುದು (ಜೂನ್ ರಿಂದ ಜುಲೈ 15 ರವರೆಗೆ), ಬಿಗಿ ತೆನೆ ಕವಚ ಇರುವ ಹೈಬ್ರಿಡ್ ಮುಸುಕಿನ ಜೋಳದ ತಳಿಗಳನ್ನು ಬಿತ್ತುವುದು, ಮುಸುಕಿನ ಜೋಳದ ಜೊತೆ ಮಿಶ್ರ ಬೆಳೆ (ಮುಸುಕಿನ ಜೋಳ+ತೊಗರಿ) ಬಿತ್ತುವುದು, ಸಮತೋಲನ ರಾಸಾಯನಿಕ ಗೊಬ್ಬರ ಬಳಸುವುದು, ಮೊಟ್ಟೆಗಳ ಗುಂಪು ಹಾಗೂ ಮೊದಲ ಹಂತದ ಮರಿಗಳಿರುವ ಎಲೆಗಳನ್ನು ಕಿತ್ತು ನಾಶ ಮಾಡುವುದು, ಪ್ರತಿ ಎಕರೆಗೆ 30 ಪಕ್ಷಿ ಸೂಚಿಗಳನ್ನು ನೆಡು ವುದು. 30 ದಿನಗಳ ಬೆಳೆಯಲ್ಲಿ ಪ್ರತಿ ಎಕರೆಗೆ 15 ರಂತೆ ಮೋಹಕ ಬಲೆಗಳನ್ನು ಅಳವಡಿಸು ವಂತೆ ಸಲಹೆ ನೀಡಿದ್ದಾರೆ.

ತತ್ತಿಗಳ ಪರತಂತ್ರ ಜೀವಿ ಯಾದ ಟ್ರೈಕೊಗ್ರಾಮ್ ಪ್ರೀಟಿ ಯೋಸಮ್ ಅನ್ನು ಪ್ರತಿ ಎಕರೆಗೆ 50,000ದಂತೆ (3 ಟ್ರೈಕೋಕಾರ್ಡಿಗಳನ್ನು) ನಿರ್ಧರಿತ ಅಂತರದಲ್ಲಿ ಬೆಳೆಗಳಲ್ಲಿ ಬಿಡುವುದು, ಮೆಟರೈಜೀಂ ಅನಿಸೋಪ್ಲಿಯೆ (1×10 ಸಿಎಫ್‌ಯು/ಗ್ರಾಂ) 5 ಗ್ರಾಂ. ಪ್ರತಿ ಲೀಟರ್ ನೀರಿಗೆ ಅಥವಾ ನ್ಯೂಮೋರಿಯಾ ರಿಲೈ (1×10 ಸಿಎಫ್‌ಯು/ಗ್ರಾಂ) ಅನ್ನು 3 ಗ್ರಾಂ. ನಂತೆ ಪ್ರತಿ ಲೀಟರ್ ನೀರಿಗೆ ಬೆರೆಸಿ ಸುಳಿಗೆ ಸಿಂಪರಣೆ ಮಾಡುವುದು.

ಲದ್ದಿ ಹುಳುವಿನಿಂದ ಶೇ.10ರಷ್ಟು (ಪ್ರತಿ100  ಗಿಡಗಳಿಗೆ 10 ಗಿಡಗಳು) ಹಾನಿಯಾಗಿದ್ದಲ್ಲಿ ಶೇ.5 ರ ಬೇವಿನ ಕಷಾಯ (ಅಜಾಡಿರಕ್ಟಿನ್ 1500 ಪಿಪಿಎಂ) 5 ಮಿ. ಲೀ. ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. 

ಲದ್ದಿ ಹುಳುವಿನಿಂದ ಶೇ.20 ರಷ್ಟು ಹಾನಿಯಾಗಿದ್ದಲ್ಲಿ ಎಮಾಮೆಕ್ಟಿನ್ ಬೆಂಜೋಯೇಟ್ 5% ಎಸ್. ಜಿ ಅನ್ನು 0.4 ಗ್ರಾಂ. ನಂತೆ ಅಥವಾ ಸ್ಪೆನೋಸಾಡ್ 45 ಎಸ್. ಸಿ. ಅನ್ನು 0.3  ಮಿ.ಲೀ. ಅಥವಾ ಥೈಯೋಡಿಕಾರ್ಬ್ 2 ಗ್ರಾಂ ಪ್ರತಿ ಲೀಟರ್ ನೀರಿಗೆ ಮಿಶ್ರಣ ಮಾಡಿ ಸಿಂಪರಣೆ ಮಾಡುವುದು ಹಾಗೂ ಪ್ರತಿ ಸಿಂಪರಣೆಯನ್ನು ಮುಂಜಾನೆ / ಸಾಯಂಕಾಲದಲ್ಲಿ ಕೈಗೊಳ್ಳಲು ತಿಳಿಸಿದ್ದಾರೆ.

ವಿಷ ಪ್ರಾಶನದ ಬಳಕೆ: 10 ಕೆ.ಜಿ. ಗೋಧಿ ತೌಡು ಅಥವಾ ಅಕ್ಕಿತೌಡಿಗೆ 1 ಕೆ.ಜಿ. ಬೆಲ್ಲ ಹಾಗೂ ಸ್ವಲ್ಪ ನೀರನ್ನು ಬೆರೆಸಿಟ್ಟು, ಮಾರನೇ ದಿನ 100 ಗ್ರಾಂ ಥೈಯೋಡಿಕಾರ್ಬ್ (ಪ್ರತಿ ಕೆ.ಜಿ. ಗೋಧಿ ತೌಡು ಅಥವಾ ಅಕ್ಕಿತೌಡಿಗೆ 10 ಗ್ರಾಂ. ನಂತೆ) ಕೀಟನಾಶಕ ಮಿಶ್ರಣ ಮಾಡಿ ಬೆಳೆಯ ಸುಳಿಯಲ್ಲಿ ಉದುರಿಸುವುದು.

ವಿಶೇಷ ಸೂಚನೆ- ಕೀಟನಾಶಕವನ್ನು ಸುಳಿಯಲ್ಲಿ ಬೀಳುವಂತೆ ಸಿಂಪರಣೆ ಮಾಡಬೇಕು. ಹಾಗೂ ಕೀಟನಾಶಕ ಸಿಂಪರಣೆ ಮಾಡುವಾಗ ಕಡ್ಡಾಯವಾಗಿ ಸುರಕ್ಷತಾ ಕವಚಗಳನ್ನು ಬಳಸಿ ಸಿಂಪರಣಾ ದ್ರಾವಣ ದೇಹದ ಮೇಲೆ ಬೀಳದಂತೆ ಹಾಗೂ ಉಸಿರಾಟದ ಮೂಲಕ ದೇಹ ಸೇರದಂತೆ ಮುನ್ನೆಚ್ಚರಿಕೆ ವಹಿಸಬೇಕು. 

ಹೆಚ್ಚಿನ ಮಾಹಿತಿಗೆ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರ, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು,  ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಲು ತಿಳಿಸಿದ್ದಾರೆ.

error: Content is protected !!